ಬೆಳ್ತಂಗಡಿ; ಸೌಜನ್ಯ ಹೆಲ್ಪ ಲೈನ್ ಸಂಬ ಹೆಸರಿನಲ್ಲಿ ನೊಂದವರಿಗೆ ಸಹಾಯ ಮಾಡುತ್ತಿರುವುದಾಗಿ ಹೇಳಿ ಪ್ರಕರಣವೊಂದನ್ನು ಹೈಕೋರ್ಟ್ ನಲ್ಲಿ ಬಗೆ ಹರಿಸುವುದಾಗಿ ಹೇಳಿ ಹಣ ಪಡೆದು ವಂಚನೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ಎಂಬುವರ ವಿರುದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜೇಶ್ ಅವರ ಬಂಟ್ವಾಳ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಬಗೆಹರಿಸುವುದಾಗಿ ಹೇಳಿ ಹಣ ಪಡೆದಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ನ ಮಾಲಾಡಿ ನಿವಾಸಿ ಕೆ.ರಾಜೇಶ್ ಎಂಬುವರು ನೀಡಿದ ದೂರಿನ ಅನ್ವಯ ಇದೀಗ ಪ್ರಕರಣ ದಾಖಲಾಗಿದೆ. ದೂರುದಾರ ರಾಜೇಶ್ ಅವರು ಗಾಯಕರಾಗಿದ್ದು ಅರವಿಂದ ವಿವೇಕ್ ಪೇಜ್ ನಲ್ಲಿ ಫೇಸ್ ಬುಕ್ ಲೈವ್ ನಲ್ಲಿ ಸಂಗೀತ ಕಾರ್ಯಕ್ರಮ ನೀಡುತ್ತಿದ್ದಾರೆ.
ದೂರುದಾರ ರಾಜೇಶ್ ಅವರಿಗೆ ಸಂಧ್ಯಾ 2024ರಲ್ಲಿ ಫೇಸ್ಬುಕ್ ಮೂಲಕ ಪರಿಚಯವಾಗಿದ್ದಾಳೆ. ತಾನು ಸೌಜನ್ಯ ಹೆಲ್ಪ್ಲೈನ್ ಮೂಲಕ ವಂಚನೆಗೊಳಗಾದವರಿಗೆ, ನೊಂದವರಿಗೆ ನೆರವಾಗುತ್ತಿದ್ದೇನೆ. ಅಮಾಯಕರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ಬಗೆಹರಿಸಿದ್ದೇನೆ ಅಂತ ರಾಜೇಶ್ ಅವರಿಗೆ ನಂಬಿಸಿದ್ದಾಳೆ.
ಆಗ, ರಾಜೇಶ್ ಅವರು ಬಂಟ್ವಾಳ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಬಗ್ಗೆ ಸಂಧ್ಯಾ ಪವಿತ್ರ ನಾಗರಾಜ್ ಗೆ ತಿಳಿಸಿದ್ದಾರೆ. ಆಗ, ಸಂಧ್ಯಾ ಹೈಕೋರ್ಟ್ನಲ್ಲಿ ಕೇಸ್ ಬಗೆಹರಿಸುತ್ತೇನೆ, ಆದರೆ, ಸ್ವಲ್ಪ ಖರ್ಚು ಇದೆ ಎಂದಿದ್ದಾಳೆ. ನಂತರ, ರಾಜೇಶ್ ಅವರಿಂದ ಸಂಧ್ಯಾ ಹಂತ ಹಂತವಾಗಿ 3.20 ಲಕ್ಷ ರೂ. ಪಡೆದಿದ್ದಾಳೆ. ಹಣ ನೀಡಿದ ನಂತರವೂ ಸಮಸ್ಯೆ ಬಗೆಹರಿಯದ ಕಾರಣ ರಾಜೇಶ್ ಅವರು ಸಂಧ್ಯಾಗೆ ಪ್ರಶ್ನಸಿದ್ದಾರೆ.
ಆಗ, ಸಂಧ್ಯಾ ಇನ್ನೂ ಹೆಚ್ಚಿನ ಹಣ ನೀಡುವಂತೆ ಸಂಧ್ಯಾ ಹೇಳಿದ್ದಾಳೆ. ಸಂಧ್ಯಾ ಮಾತು ಕೇಳಿ ಸಂಶಯಗೊಂಡ ರಾಜೇಶ್ ಅವರು ಕೋರ್ಟ್ಗೆ ಸಲ್ಲಿಸಿರುವ ದಾಖಲೆಗಳ ಬಗ್ಗೆ ಕೇಳಿದ್ದಾರೆ. ಸಂಧ್ಯಾ ಬೆದರಿಕೆ ಹಾಕಿದ್ದಾಳೆ ಎನ್ನಲಾಗಿದ್ದು ಈ ಹಿನ್ನಲೆಯಲ್ಲಿ ರಾಜೇಶ್ ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಿಎನ್ಎಸ್ ಕಾಯ್ದೆ 318(4) ಮತ್ತು 351(2) ಸೆಕ್ಷನ್ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
