


ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡಿಸಿದ 17 ನೇ ಬಜೆಟ್ ಸರ್ವರಿಗೂ ಸಮಪಾಲು ನೀಡಿರುವ ಈ ಐತಿಹಾಸಿಕ ಬಜೆಟ್. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ಮುನ್ನುಡಿ ಬರೆದಿದೆ. ವಿದ್ಯಾರ್ಥಿ, ಯುವಜನ , ಮಹಿಳಾ, ರೈತರು , ಕೂಲಿಕಾರರ ಪರವಾಗಿರುವ , ದಲಿತರು, ಆದಿವಾಸಿಗಳು , ಹಿಂದುಳಿದ ವರ್ಗಗಳ ಅಭಿವೃದ್ಧಿ ದೃಷ್ಟಿಕೋನದಿಂದ ಕೂಡಿದ ಬಜೆಟ್ ಇದಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡಲು ಎರಡು ಹೊಸ ಪೋಲಿಸ್ ಠಾಣೆಗಳ ಮಂಜೂರು , ಹಲವು ವರ್ಷಗಳ ಜನರ ಬಹುಮುಖ್ಯ ಬೇಡಿಕೆಯಾಗಿದ್ದ ಸರ್ಕಾರಿ ಮೆಡಿಕಲ್ ಕಾಲೇಜ್ ಗೆ ಪೂರಕವಾಗಿ ನೂತನ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಮೀಸಲಿಡಲಾಗಿದೆ. ಎಸ್ಸಿ/ಎಸ್ಟಿ ಉದ್ಯೋಗಸ್ಥ ಮಹಿಳೆಯರಿಗಾಗಿ ವಸತಿ ನಿಲಯ ಸ್ಥಾಪನೆ ಅಭಿವೃದ್ಧಿ ಹೊಸ ಮೈಲಿಗಲ್ಲು.
ವಿಶ್ವವಿದ್ಯಾಲಯಗಳಲ್ಲಿ ಶೈಕ್ಷಣಿಕ , ಸಾಮಾಜಿಕ ದೌರ್ಜನ್ಯಗಳನ್ನು ತಡೆಗಟ್ಟಲು ರೋಹಿತ್ ವೇಮುಲ ಕಾಯಿದೆ ಜಾರಿಗೊಳಿಸಿರುವ ರಾಜ್ಯ ಸರ್ಕಾರದ ಕ್ರಮ ಐತಿಹಾಸಿಕವಾದುದು. ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್ , 800 ನೂತನ ಕೆಪಿಎಸ್ ಶಾಲೆಗಳ ಘೋಷಣೆ ಮಾಡಿರುವುದು ರಾಜ್ಯದಲ್ಲಿ ಶೈಕ್ಷಣಿಕ ಕ್ರಾಂತಿಯ ಭಾಗವಾಗಿದೆ. ಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ ಜಾರಿಗೆ ತರುವ ಮೂಲಕ ಕರಾವಳಿಯ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲಾಗಿದೆ. ಅಡಿಕೆ ಎಲೆಚುಕ್ಕಿ ರೋಗ , ಬಿಳಿಕೀಟಗಳ ನಿಯಂತ್ರಣಕ್ಕಾಗಿ ಕೃಷಿ ವಿಶ್ವವಿದ್ಯಾಲಯಗಳ ಸಹಯೋಗದೊಂದಿಗೆ ಕ್ರಮ ಕೈಗೊಳ್ಳುವ ಮೂಲಕ ಅಡಿಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಲಾಗಿದೆ. ಮಾನವ- ವನ್ಯಜೀವಿ ಸಂಘರ್ಷಕ್ಕಾಗಿ ಮಾನವ- ವನ್ಯಜೀವಿ ಸಂರಕ್ಷಣಾ ಕಾರ್ಯತಂತ್ರ ಯೋಜನೆಗಾಗಿ 5 ವರ್ಷಗಳಲ್ಲಿ 150 ಕೋಟಿ ಮೀಸಲು , ರೈತರಿಗೆ 0 ಬಡ್ಡಿದರದಲ್ಲಿ 30,000 ಕೋಟಿ ಕೃಷಿಸಾಲ , ಅರಣ್ಯ/ ಅರಣ್ಯದಂಚಿನಲ್ಲಿ ವಾಸಿಸುವ ವಸತಿರಹಿತ ಕುಟುಂಬಗಳಿಗೆ 4.50 ಲಕ್ಷ ವೆಚ್ಚದ ಮನೆ ನಿರ್ಮಾಣ ಸೇರಿದಂತೆ ಕಾರ್ಮಿಕರ ಮಕ್ಕಳಿಗೆ ಶ್ರಮಿಕ ವಸತಿಶಾಲೆ ನಿರ್ಮಾಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ಸಮಾಜದ ಕಟ್ಟಕಡೆಯ ಜನರಿಗೆ ಸಾಮಾಜಿಕ ನ್ಯಾಯವನ್ನು ಒದಗಿಸುವ ಮೂಲಕ ಐತಿಹಾಸಿಕ ಬಜೆಟ್ ಮಂಡಿಸಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.



