ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರೂ ಮಾಳಿಗೆ ಬೈಲು ಆದಿವಾಸಿ ಕುಟುಂಬಗಳಿಗೆ ವಿದ್ಯುತ್ ಸಂಪರ್ಕವನ್ನು ಒದಗಿಸಿದ ರಾಜ್ಯ ಸರ್ಕಾರ, ಈಗ ಈ ಪ್ರದೇಶದಲ್ಲಿ ವಾಸಿಸುತ್ತಿರುವ ಇತರ 16 ಕುಟುಂಬಗಳಿಗೂ ವಿದ್ಯುತ್ ಸಂಪರ್ಕ ಒದಗಿಸಲು ಅನುದಾನ ಮಂಜೂರು ಮಾಡಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.
ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ನೇತೃತ್ವದ ಸರಣಿ ಸಭೆಗಳ ನಂತರ ಅಡವಿಯಲ್ಲಿರುವ ಮತ್ತು ರಾಷ್ಟ್ರೀಯ ಉದ್ಯಾನವನದ ಅಂಚಿನಲ್ಲಿರುವ ಕುಟುಂಬಗಳಿಗೆ ಮೂಲ ಸೌಕರ್ಯ ಒದಗಿಸುವ ನಿಟ್ಟಿ ನಲ್ಲಿ ಪ್ರಪ್ರಥಮ ಬಾರಿಗೆ ಈ ಭಾಗದ ಆದಿವಾಸಿ ಕುಟುಂಬಗಳ ಜನರಿಗೆ ವಿದ್ಯುತ್ ಸಂಪರ್ಕ ನೀಡಲಾಗಿತ್ತು. ಈಗ ಇತರೆ ಕುಟುಂಬಗಳಿಗೂ ವಿದ್ಯುತ್ ಸಂಪರ್ಕ ಒದಗಿಸಲು 26.6 ಲಕ್ಷ ಅನುದಾನ ನೀಡಿದೆ. ಬಹುದಿನಗಳಿಂದ ಬೇಡಿಕೆ ಇದ್ದ ಕದಿರೇಶ್ವರ ದೇವಾಲಯಕ್ಕೂ ಕೂಡ ವಿದ್ಯುತ್ ಸಂಪರ್ಕವನ್ನು ನೀಡುವ ಕೆಲಸ ಪ್ರಾರಂಭವಾಗಿದೆ ಇದರಿಂದ ಬಹುಕಾಲದಿಂದ ಕತ್ತಲೆಯಲ್ಲಿ ಜೀವನ ಮಾಡುತ್ತಿದ್ದ ಕುಟುಂಬಗಳ ಮನೆಯಲ್ಲಿ ದೀಪ ಉರಿಯುವ ಕೆಲಸವನ್ನು ಸರ್ಕಾರ ಮಾಡಿದೆ. ಈ ನಿಟ್ಟಿನಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಕ್ಷಿತ್ ಶಿವರಾಮ್ ಸರಕಾರಕ್ಕೆ ಅಭಿನಂದನೆ ಸಲ್ಲಿಸಿದರು. ಈ ನಿಟ್ಟಿನಲ್ಲಿ ಸುದೀರ್ಘವಾಗಿ ಕೆಲಸ ಮಾಡಿದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೆಡಿ ಮತ್ತು ಅವರ ತಂಡದ ಕಾರ್ಯವೈಖರಿಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.









