ಬೆಳ್ತಂಗಡಿ: ರಾಜ್ಯ ಸರಕಾರದ ಆದೇಶದಂತೆ ರಾಜ್ಯದ ಎಲ್ಲ ಕಡೆಗಳಲ್ಲಿ ವ್ಯಾಪಾರ ವ್ಯವಹಾರ ಮಳಿಗೆಗಳಲ್ಲಿ ಅಳವಡಿಸಲಾಗುವ ನಾಮಫಲಕಗಳಲ್ಲಿ 60% ಕನ್ನಡ ಬರಹ ಇರಬೇಕಾಗಿದ್ದು; ಈ ಆದೇಶದ ಅನುಷ್ಠಾನಕ್ಕೆ ಆಡಳಿತ ವ್ಯವಸ್ಥೆಯನ್ನು ಸ್ಥಳೀಯವಾಗಿ ಸಜ್ಜುಗೊಳಿಸಲು ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮೇ 15ರಂದು ನಡೆದ ತಾಲೂಕಿನ ಗ್ರಾಮ ಪಂಚಾಯತ್ಗಳ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಅಗತ್ಯ ಮಾಹಿತಿ ನೀಡಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಜಾಗೃತಿ ಸಮಿತಿಯ ಸದಸ್ಯರಾದ ಜೈಕನ್ನಡಮ್ಮ ಪತ್ರಿಕೆಯ ಸಂಪಾದಕ ದೇವಿಪ್ರಸಾದ್ ಸವಿವರವಾಗಿ ಮಾಹಿತಿ ನೀಡುತ್ತಾ; ಬೆಳ್ತಂಗಡಿ ತಾಲೂಕಿನಲ್ಲಿ ಎಲ್ಲಕಡೆ ಕನ್ನಡ ನಾಮಫಲಕಗಳ ಕಡ್ಡಾಯ ಅಳವಡಿಕೆಗೆ ಎಲ್ಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಹಕಾರ ಕೋರಿದರಲ್ಲದೇ, ಗ್ರಾಮ ಪಂಚಾಯತ್ ಮಟ್ಟದಲ್ಲಿ ಈ ವಿಚಾರವಾಗಿ ಜಾಗೃತಿ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳೋಣ ಎಂದರು.
ಮುಂದಿನ ದಿನಗಳಲ್ಲಿ ಅಗತ್ಯ ಇರುವ ಗ್ರಾಮ ಪಂಚಾಯತ್ ವ್ಯಾಪ್ತಿಗೆ ವ್ಯಾಪಾರಸ್ಥರಿಗೆ ನಾಮಫಲಕಗಳಲ್ಲಿ ಕನ್ನಡ ಭಾಷೆ ಅಳವಡಿಕೆ ಬಗ್ಗೆ ತಿಳುವಳಿಕೆ ನೀಡಿ ಜಾಗೃತಿ ಮೂಡಿಸಲು ನೀವು ತಿಳಿಸಿದ ದಿನದಂದು ಬಂದು ಜೊತೆ ಸೇರಲು ನಾನು ಸಿದ್ಧ ಎಂದ ದೇವಿಪ್ರಸಾದ್; ಎಲ್ಲರೂ ಒಟ್ಟು ಸೇರಿ ನಮ್ಮ ರಾಜ್ಯದ ಮಾತೃಭಾಷೆ ಕನ್ನಡವನ್ನು ನಮ್ಮ ದೈನಂದಿನ ವ್ಯವಹಾರದಲ್ಲಿ ಬಳಸಲು ನಮ್ಮಿಂದಾದ ಪ್ರಯತ್ನ ಮಾಡುವ ಮೂಲಕ ಮಾತೃಭಾಷೆ ಋಣವನ್ನು ಕಿಂಚಿತ್ತಾದರೂ ತೀರಿಸೋಣ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಸ್ವಾಗತಿಸಿ, ಕೊನೆಯಲ್ಲಿ ವಂದಿಸಿದರು.
