ಬೆಳ್ತಂಗಡಿ : ವಿವಾಹಿತ ಮಹಿಳೆಯನ್ನು ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ವಿವಾಹಿತ ಮಹಿಳೆಯನ್ನು ಡಿಸೆಂಬರ್ 2023 ರಲ್ಲಿ ಅತ್ಯಾಚಾರ ಮಾಡಿದ್ದ ಎನ್ನಲಾಗಿದೆ. ಈ ಪ್ರಕರಣ ಸಂಬಂಧ ಸಂತ್ರಸ್ತ ಮಹಿಳೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಇದೇ ಜೂ.7 ರಂದು ದೂರು ನೀಡಿದ್ದರು.
ಪ್ರಕರಣದ ಬಗ್ಗೆ ತನಿಖೆ ನಡೆಸಿದ ಧರ್ಮಸ್ಥಳ ಪೊಲೀಸರು ಆರೋಪಿ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕುತ್ತೋಡಿ ನಿವಾಸಿ ಪ್ರಸ್ತುತ ಅರಸಿಮಕ್ಕಿ ಗ್ರಾಮದ ಗ್ರಾಮೀಣ ಅಂಚೆ ವಿತರಕ ಆಗಿರುವ ಸುರೇಶ್(35) ಎಂಬಾತನನ್ನು ಕಳೆಂಜದಲ್ಲಿ ಜೂ.8 ರಂದು ರಾತ್ರಿ ಬಂಧಿಸಿ ವಿಚಾರಣೆ ನಡೆಸಿ ಜೂ.9 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು. ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ಧರ್ಮಸ್ಥಳ ಪ್ರಭಾರ ಸಬ್ ಇನ್ಸ್ಪೆಕ್ಟರ್ ಕಿಶೋರ್.ಪಿ, ಸಬ್ ಇನ್ಸ್ಪೆಕ್ಟರ್ ಸಮರ್ಥ ಆರ್ ಗಾಣಿಗೇರ ತಂಡದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.
