ಬೆಳ್ತಂಗಡಿ; ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಜೂ. 26 ರಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ.
ಮುಂಜಾನೆ ಸುಲ್ಕೇರಿ ಗ್ರಾಮದಲ್ಲಿ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಮಾರುತಿ ಸುಜುಕಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾಂಕ್ರೀಟ್ ಕಂಬ ಮುರಿದು ಕಾರಿನ ಮೇಲೆಯೇ ಬಿದ್ದಿದ್ದು, ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಾನೆಟ್, ಬಂಪರ್, ಇಂಜಿನ್ ಭಾಗ ಸಂಪೂರ್ಣ ಜಖಂಗೊಂಡಿದೆ. ಕಾರಿನ ಹಳದಿ ನಂಬರ್ ಪ್ಲೇಟ್ ಇದ್ದು, ಇದು ಬಾಡಿಗೆ ವಾಹನ ಎಂದು ತಿಳಿದುಬಂದಿದೆ.
ಅಪಘಾತದಿಂದ ವಿದ್ಯುತ್ ತಂತಿಗಳು ತುಂಡಾಗಿ ರಸ್ತೆಯಲ್ಲಿ ಬಿದ್ದಿವೆ. ಸ್ಥಳದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಮೆಸ್ಕಾಂ ಸಿಬ್ಬಂದಿ ದುರಸ್ತಿ ಕಾರ್ಯ ಕೈಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿರುವುದಾಗಿ ತಿಳಿದು ಬಂದಿದ್ದು ಅವರ ಸ್ಥಿತಿಯ ಬಗ್ಗೆ ಪೊಲೀಸರಿಂದ ಅಧಿಕೃತ ಮಾಹಿತಿ ಇನ್ನಷ್ಟೇ ಬರಬೇಕಿದೆ. ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.




