ಬೆಳ್ತಂಗಡಿ: ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಒಂದು ತಿಂಗಳ ಕಾರಾಗೃಹ ಶಿಕ್ಷೆಗೆ ಒಳಗಾದ ಬಳಿಕ ತಲೆ ಮರೆಸಿಕೊಂಡಿರುವ ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ವಿಠಲ ಗೌಡ ಅವರ ಬಂಧನಕ್ಕೆ ಪೊಲೀಸರು ಜೂ.27ರಂದು ಬೆಳ್ತಂಗಡಿ ತಾಲೂಕಿನ ವಿವಿದೆಡೆ ವ್ಯಾಪಕ ಶೋಧ ನಡೆಸಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ ಕುರಿತು ಅವಹೇಳನಕಾರಿಯಾಗಿ ಮಾತನಾಡದಂತೆ ನ್ಯಾಯಾಲಯ ನಿರ್ಬಂಧ ವಿಧಿಸಿದ್ದರೂ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಮಾತಾಡಿದ ವಿಠಲ ಗೌಡ ಅವರಿಗೆ ಬೆಂಗಳೂರು ನ್ಯಾಯಾಲಯ ಒಂದು ತಿಂಗಳ ಸಜೆ ವಿಧಿಸಿ ನಾಲ್ಕು ತಿಂಗಳ ಹಿಂದೆ ಆದೇಶ ನೀಡಿತ್ತು. ಬಳಿಕ ತಲೆ ಮರೆಸಿಕೊಂಡಿರುವ ವಿಠಲ ಗೌಡ ಸ್ಥಳೀಯ ಪೋಲೀಸರಿಗೂ ಸಿಗದೆ ತಲೆಮರೆಸಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ವಿಠಲ ಗೌಡ ಅವರನ್ನು ಬಂಧಿಸಲು ಜೂ.27ರಂದು ಬೆಂಗಳೂರಿನಿಂದ ಕೋರ್ಟ್ ಅಧಿಕಾರಿಗಳೊಂದಿಗೆ ಆಗಮಿಸಿರುವ ಪೊಲೀಸರು ವಿವಿಧೆಡೆ ಶೋಧ ನಡೆಸಿದ್ದಾರೆ. ವಿಠಲ ಗೌಡ ಅವರ ಮನೆ, ಕುಸುಮಾವತಿಯವರ ಮನೆ ಮಹೇಶ್ ಶೆಟ್ಟಿ ತಿಮರೋಡಿ ಮನೆ ಸಹಿತ ಹಲವೆಡೆ ಶೋಧ ನಡೆಸಿ ವಿಠಲ ಗೌಡರ ಬಂಧನಕ್ಕೆ ಪ್ರಯತ್ನನಡೆಸಿದ್ದಾರೆ.
ನ್ಯಾಯಾಲಯದ ಆದೇಶ ಪ್ರಶ್ನಿಸಿ ವಿಠಲ ಗೌಡ ಉಚ್ಛ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವುದಾಗಿ ತಿಳಿದು ಬಂದಿದ್ದು ಇದರ ವಿಚಾರಣೆ ಇನ್ನಷ್ಟೇ ನಡೆಯಬೇಕಿದೆ.
