
ಬೆಳ್ತಂಗಡಿ: ಬಿ.ಸಿ ರೋಡಿನಲ್ಲಿ ನಡೆದ ಯುವತಿಯ ಬರ್ಬರ ಹತ್ಯೆ ಅತ್ಯಂತ ಅಮಾನವೀಯ ಹಾಗೂ ಖಂಡನೀಯ ಘಟನೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ರೀತಿಯ ಹೇಯ ಕೃತ್ಯಗಳು ಸಮಾಜದಲ್ಲಿ ಭಯದ ವಾತಾವರಣವನ್ನು ಸೃಷ್ಟಿಸುತ್ತವೆ. ಮಹಿಳೆಯರ ಸುರಕ್ಷತೆಯ ಕುರಿತು ಸಾರ್ವಜನಿಕರಲ್ಲಿ ಆತಂಕ ಮೂಡಿಸುವ ಇಂತಹ ಘಟನೆಗಳನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ತಪ್ಪಿತಸ್ಥರನ್ನು ಕಾನೂನಿನ ಮುಂದೆ ತಂದು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಈ ಪ್ರಕರಣದ ಕುರಿತು ಪೊಲೀಸರು ತ್ವರಿತ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ, ಘಟನೆಯ ಹಿಂದಿರುವ ಎಲ್ಲ ಸತ್ಯಾಂಶಗಳನ್ನು ಬಹಿರಂಗಪಡಿಸಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಯಾವುದೇ ಒತ್ತಡ ಅಥವಾ ಪ್ರಭಾವಕ್ಕೆ ಮಣಿಯದೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮೃತ ಯುವತಿಯ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಸಂತಾಪ ಸೂಚಿಸಿದ ಅವರು, ಸರ್ಕಾರವು ಕುಟುಂಬಕ್ಕೆ ಅಗತ್ಯ ನೆರವು ಹಾಗೂ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಸಮಾಜದಲ್ಲಿ ಮಹಿಳೆಯರ ಸುರಕ್ಷತೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ, ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ. ಇಂತಹ ಘಟನೆಗಳು ಮರುಕಳಿಸದಂತೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಕ್ಷಿತ್ ಶಿವರಾಂ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.