
ಬೆಳ್ತಂಗಡಿ : ಬಾಗಲಕೋಟೆಯಲ್ಲಿ ಇತ್ತೀಚೆಗೆ ಪತ್ತೆಯಾದ ಐದೂವರೆ ಕೋಟಿ ರೂಪಾಯಿ ಮೌಲ್ಯದ ಮಾದಕ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣದಲ್ಲಿ ಈಗಾಗಲೇ ಮೂವರನ್ನು ಬಂಧಿಸಿಸಿರುವ ಪೊಲೀಸರು ಬೆಳ್ತಂಗಡಿಯ ಆಂಬುಲೆನ್ಸ್ ಚಾಲಕ ಜಲೀಲ್ ಬಾಬಾ ಡ್ರಗ್ಸ್ ದಂಧೆಯ ತಂಡದಲ್ಲಿರುವುದನ್ನು ಪತ್ತೆಹಚ್ಚಿದ್ದು ಜಲೀಲ್ ವಿರುದ್ದವೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಪ್ರಕರಣದ ವಿವರ : ಮಂಗಳೂರು ನಗರ ಸಿಸಿಬಿ ಪೊಲೀಸರು ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಸಮೀಪದ ಮನೆಗೆ ಜೂ.25 ರಂದು ನಡೆಸಿದ ದಾಳಿಯಲ್ಲಿ ಅಣ್ಣಪ್ಪ ಸ್ವಾಮಿ ಅಲಿಯಾಸ್ ಮನು ಎಂಬಾತನಿಂದ 1.50 ಲಕ್ಷ ಮೌಲ್ಯದ 15.17 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದರು. ಈ ಪ್ರಕರಣದ ತನಿಖೆ ವೇಳೆ ಮಾದಕ ವಸ್ತು ಪೂರೈಕೆ ಜಾಲದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದೆಹಲಿಯಿಂದ ಎಂಡಿಎಂಎ ಖರೀದಿಸಿಕೊಂಡು ಬೆಂಗಳೂರಿಗೆ ಸಾಗಿಸುತ್ತಿದ್ದ ಜಾಲದ ಬಗ್ಗೆ ಸುಳಿವು ಪಡೆದರು.
ಜುಲೈ 15 ರಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ರಾಯಲ್ ಇನ್ ಲಾಡ್ಜ್ ಮೇಲೆ ದಾಳಿ ನಡೆಸಿ ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅವರಿಂದ ಅಂದಾಜು ಐದೂವರೆ ಕೋಟಿ ರೂ. ಮೌಲ್ಯದ ಒಟ್ಟು 5 ಕೆಜಿ 196 ಗ್ರಾಂ ಎಂಡಿಎಂಎ, ಕಾರು, ಬ್ಯಾಗ್ ಮತ್ತು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿತ್ತು.ಪ್ರಮುಖ ಆರೋಪಿ ಮೊಹಮ್ಮದ್ ಅಲ್ತಾಫ್ ವಿರುದ್ಧ ಈ ಹಿಂದೆ 2024 ರಲ್ಲಿ ಕೊಣಾಜೆ ಪೊಲೀಸ್ ಠಾಣೆ ಮತ್ತು 2026 ರಲ್ಲಿ ಉರ್ವ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣಗಳು ದಾಖಲಾಗಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ.
ಮೂವರ ಬಂಧನ: ಈಗಾಗಲೇ ಪ್ರಕರಣದಲ್ಲಿ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಮೊಹಮ್ಮದ್ ಅಲ್ತಾಫ್ (28), ಲಾಯಿಲ ಗ್ರಾಮದ ಹಳೆಪೇಟೆಯ ಮೊಹಮ್ಮದ್ ಮುಸ್ತಫಾ (28), ಇಂದಬೆಟ್ಟು ಗ್ರಾಮದ ದೇವನಾರಿ ನಿವಾಸಿ ಅಲ್ಫಾಜ್ ಮತ್ತು ಅಣ್ಣಪ್ಪ ಸ್ವಾಮಿ ಅಲಿಯಾಸ್ ಮನು (26) ಎಂಬವರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ. ಈ ಪೈಕಿ ಅಣ್ಣಪ್ಪ ಸ್ವಾಮಿ ಎಂಬವನನ್ನು ಮೊದಲೇ ಬಂಧಿಸಿ ಜೈಲಿಗಟ್ಟಲಾಗಿದ್ದು, ಬೆಳ್ತಂಗಡಿಯ ಜಲೀಲ್ (42) ಎಂಬಾತನೂ ಇದೀಗ ನಾಲ್ಕನೇ ಆರೋಪಿ ಎಂದು ದಾಖಲಾಗಿದೆ.
ಕೋರ್ಟ್ ಗೆ ವರದಿ ಸಲ್ಲಿಕೆ: ಮಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ)
ಪೊಲೀಸರು ಮಂಗಳೂರಿನ ಪ್ರಿನ್ಸಿಪಾಲ್ ಸೆಷನ್ಸ್ ನ್ಯಾಯಾಲಯಕ್ಕೆ ಜು.16 ರಂದು ಸಲ್ಲಿಸಿದ ಇಬ್ಬರು ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲು ಹಾಗೂ ಮುಂದಿನ ತನಿಖೆಯಲ್ಲಿ ನಾಲ್ಕನೇ ಆರೋಪಿ ಬೆಳ್ತಂಗಡಿಯ ಆಂಬುಲೆನ್ಸ್ ಚಾಲಕ
ಜಲೀಲ್ @ ಬಾಬಾ ಎಂಬವನ ಹೆಸರನ್ನು ಉಲ್ಲೇಖಿಸಿ ಬಂಧನ ಬಾಕಿ ಇದೆ ಎಂದು ವರದಿಯಲ್ಲಿ ತಿಳಿಸಿರುತ್ತಾರೆ.