Home ರಾಜಕೀಯ ಸಮಾಚಾರ ಡಿ.ಸಿ ಮನ್ನಾ ಭೂಮಿ ಹಂಚಿಕೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

ಡಿ.ಸಿ ಮನ್ನಾ ಭೂಮಿ ಹಂಚಿಕೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

5
0

ಬೆಳ್ತಂಗಡಿ;  ಪ.ಜಾತಿ/ ಪಂಗಡಗಳ ಹಲವು ವರ್ಷಗಳ ಬೇಡಿಕೆಯಾಗಿರುವ ಡಿಸಿ ಮನ್ನಾ ಜಮೀನು ಹಂಚಿಕೆಗೆ ಸಂಬಂಧಿಸಿದಂತೆ ರಾಜ್ಯ ಕಂದಾಯ ಸಚಿವ , ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ , ದ.ಕ ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ ಖಾದರ್ ಅವರನ್ನು ಬೆಂಗಳೂರಿನ ವಿಧಾನಸೌಧದ ಅವರ ಕಚೇರಿಯಲ್ಲಿ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಕಾಂಗ್ರೆಸ್ (ನಗರ) ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ ರವರ ನೇತೃತ್ವದಲ್ಲಿ ತಾಲೂಕಿನ ದಲಿತ ನಾಯಕರು ಭೇಟಿಯಾದರು.

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಡಿಸಿ ಮನ್ನಾ ಜಮೀನು ಹಂಚಿಕೆ ಬಗ್ಗೆ ಘೋಷಣೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅಂದಿನ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿದ್ದ ಪ್ರಸ್ತುತ ಉಪ ಮುಖ್ಯಮಂತ್ರಿ , ಕಂದಾಯ ಸಚಿವರಾದ ಡಾ.ಜಿ ಪರಮೇಶ್ವರರವರನ್ನು ವಿಧಾನಸೌಧದಲ್ಲಿ ಭೇಟಿಯಾಗಿ ಮಾತುಕತೆ ನಡೆಸಲಾಯಿತು. ಬಳಿಕ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಅವರನ್ನು ಭೇಟಿಯಾಗಿ ಪ್ರಣಾಳಿಕೆಯ ಭಾಗವಾಗಿರುವ ಡಿಸಿ ಮನ್ನಾ ಜಮೀನು ಹಂಚಿಕೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಆದೇಶ ನೀಡುವ ಬಗ್ಗೆ ಗಮನ ಸೆಳೆಯಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಡಿಸಿ ಮನ್ನಾ ಜಮೀನು ಹಂಚಿಕೆ ಬಗ್ಗೆ ವಿಧಾನಸಭಾ ಅಧಿವೇಶನ ಮುಗಿದ ನಂತರ ನನ್ನ ಅಧ್ಯಕ್ಷತೆಯಲ್ಲಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತ್ಯೇಕ ಸಭೆ ಕರೆದು ಚರ್ಚಿಸುವುದಾಗಿ ಬರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ , ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್‌ ಕುಕ್ಕೇಡಿ , ಆದಿದ್ರಾವಿಡ ಸಂಘದ ರಾಜ್ಯಾಧ್ಯಕ್ಷ ಗಣೇಶ್ ಪ್ರಸಾದ್ ಮೂಡಬಿದಿರೆ , ದಸಂಸ ಮುಖಂಡರುಗಳಾದ ಬಿ.ಕೆ ವಸಂತ್ , ಬೇಬಿ ಸುವರ್ಣ , ವೆಂಕಣ್ಣ ಕೊಯ್ಯೂರು , ನೇಮಿರಾಜ್ ಕಿಲ್ಲೂರು , ರಮೇಶ್ ಆರ್ , ರವಿಚಂದ್ರ ನಾಯ್ಕ್ ಮುಂಡಾಜೆ , ಪ್ರಭಾಕರ್ ಶಾಂತಿಗೋಡು , ಚೆನ್ನಕೇಶವ , ಶೇಖರ್ ಲಾಯಿಲ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here