ಬೆಳ್ತಂಗಡಿ: ಸೆ.03. ತಾಲೂಕಿನ ನಾರಾವಿಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಮೂಲಸೌಕರ್ಯ ಅಭಿವೃದ್ಧಿಗೆ DA-JGUA ಯೋಜನೆಯಡಿ ಒಟ್ಟು ರೂ.3 ಕೋಟಿ 25 ಲಕ್ಷ ಅನುದಾನ ಮಂಜೂರಾಗಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.
ಇದೇ ಶಾಲಾ ಆವರಣದಲ್ಲಿ ಈಗಾಗಲೇ ವಿದ್ಯಾರ್ಥಿಗಳ ವಸತಿ ಸೌಲಭ್ಯವನ್ನು ಹೆಚ್ಚಿಸುವ ಉದ್ದೇಶದಿಂದ ರೂ.2.00 ಕೋಟಿ ವೆಚ್ಚದಲ್ಲಿ ವಿದ್ಯಾರ್ಥಿ ವಸತಿ ನಿಲಯ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದ್ದು, ನಿರ್ಮಿತಿ ಕೇಂದ್ರದ ಮೂಲಕ ಕಾಮಗಾರಿಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಪ್ರಸ್ತುತ ವಿದ್ಯಾರ್ಥಿಗಳ ಶೈಕ್ಷಣಿಕ ಸೌಲಭ್ಯವನ್ನು ಇನ್ನಷ್ಟು ಉತ್ತಮಗೊಳಿಸುವ ಉದ್ದೇಶದಿಂದ ಶಾಲೆಯಲ್ಲಿ 7 ನೂತನ ತರಗತಿ ಕೊಠಡಿಗಳ ನಿರ್ಮಾಣಕ್ಕೆ ರೂ.2 ಕೋಟಿ 45 ಲಕ್ಷ ಅನುದಾನ ಮಂಜೂರು ಮಾಡಲಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ಮೂಲಭೂತ ಸೌಲಭ್ಯಗಳನ್ನು ವೃದ್ಧಿಸುವ ನಿಟ್ಟಿನಲ್ಲಿ ಹುಡುಗಿಯರಿಗೆ 2 ಬ್ಲಾಕ್ ಹಾಗೂ ಹುಡುಗರಿಗೆ 2 ಬ್ಲಾಕ್ ಸೇರಿದಂತೆ ಒಟ್ಟು 4 ಬ್ಲಾಕ್ ಶೌಚಾಲಯಗಳ ನಿರ್ಮಾಣಕ್ಕೆ ರೂ.80 ಲಕ್ಷ ಅನುದಾನ ಒದಗಿಸಲಾಗಿದೆ. ಈ ಉದ್ದೇಶಿತ ಕಾಮಗಾರಿಯನ್ನು ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈ ಎಲ್ಲಾ ಕಾಮಗಾರಿಗಳಿಂದ ಆದಿವಾಸಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಮತ್ತು ಮೂಲಸೌಕರ್ಯ ಸೌಲಭ್ಯಗಳು ದೊರೆಯಲಿವೆ ಎಂದು ಅವರು ತಿಳಿಸಿದ್ದಾರೆ.
ಈ ಮಹತ್ವದ ಅಭಿವೃದ್ಧಿ ಕಾರ್ಯಕ್ಕೆ ಅಗತ್ಯ ಅನುದಾನ ಒದಗಿಸಿದ ಕೇಂದ್ರ ಸರಕಾರಕ್ಕೆ ಹಾಗೂ ಅನುದಾನ ಮಂಜೂರಾತಿಗೆ ಸಹಕಾರ ನೀಡಿದ ದಕ್ಷಿಣ ಕನ್ನಡ ಸಂಸದರಾದ ಸನ್ಮಾನ್ಯ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಶಾಸಕ ಹರೀಶ್ ಪೂಂಜ ಕೃತಜ್ಞತೆ ಸಲ್ಲಿಸಿದ್ದಾರೆ.









