ತ್ರಿಶೂರ್: ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ತಮಿಳುನಾಡಿನ ಎಂಟು ಮಂದಿ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಸಂಭವಿಸಿದೆ.
ಶುಕ್ರವಾರ ರಾತ್ರಿ ಸುಮಾರು 11.40ರ ವೇಳೆಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಕೈಪಮಂಗಲಂ ಸಮೀಪದ ಪನಂಬಿಕ್ಕುನ್ನು ಎಂಬಲ್ಲಿ ಹೆದ್ದಾರಿ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ನೇರವಾಗಿ ಡಿಕ್ಕಿ ಹೊಡೆದಿದೆ.
ಕಾರಿನಲ್ಲಿದ್ದ ಎಲ್ಲ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಅಪಘಾತದ ತೀವ್ರತೆಗೆ ಲಾರಿಯೊಳಗೆ ನೇರವಾಗಿ ನುಗ್ಗಿದ್ದು ಕಾರು ಸಂಪೂರ್ಣ ವಾಗಿ ನುಜ್ಜುಗುಜ್ಜಾಗಿದೆ. ಅದರೊಳಗೆ ಸಿಲುಕಿ ಎಲ್ಲ ಎಂಟು ಮಂದಿಯೂ ಮೃತಪಟ್ಟಿದ್ದಾರೆ.
ಅಗ್ನಿಶಾಮಕ ಮತ್ತು ರಕ್ಷಣಾ ಸಿಬಂದಿ ಹಾಗೂ ಪೊಲೀಸರು ನಡೆಸಿದ ರಕ್ಷಣಾ ಕಾರ್ಯಾಚರಣೆಯಲ್ಲಿ ಮೃತದೇಹಗಳನ್ನು ಕಾರಿನಿಂದ ಹೊರತೆಗೆಯಲಾಯಿತು.
ಮೃತದೇಹಗಳನ್ನು ತ್ರಿಶೂರ್ ವೈದ್ಯಕೀಯ ಕಾಲೇಜಿನ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತಕ್ಕೀಡಾದ ಕಾರು ತಮಿಳುನಾಡು ನೋಂದಣಿ ಹೊಂದಿತ್ತು. ಮೃತಪಟ್ಟವರು ತಮಿಳುನಾಡಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದಾರೆ. ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಗುರುವಾಯೂರು ಕಡೆಯಿಂದ ಕೊಗಡಂಗನಲ್ಲೂರು ಕಡೆಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.
ರಸ್ತೆಯಲ್ಲಿ ನಿಲ್ಲಿಸಿದ್ದ ಲಾರಿಯೇ ಅಪಘಾತಕ್ಕೆ ಕಾರಣವಾಗಿದ್ದು ಲಾರಿ ಚಾಲಕನ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಯಾವುದೇ ಸೂಚನೆಗಳಿಲ್ಲದೆ ವಾಹನಗಳನ್ನು ರಸ್ತೆಯಲ್ಲಿ ನಿಲ್ಲಿಸುವವರ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.










