ಮಂಗಳೂರು: ನಗರದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಸೋಮವಾರ ತಡರಾತ್ರಿ ದಾಳಿ ನಡೆಸಿರುವ ಪೊಲೀಸರು ನ್ಯಾಯಾಂಗ ಬಂಧನದಲ್ಲಿರುವ ಕೈದಿಗಳ ಬಳಿಯಿಂದ 10 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿಯ ಆಧಾರದಲ್ಲಿ ಪೊಲೀಸರು ಸೋಮವಾರ ತಡರಾತ್ರಿ ಜಿಲ್ಲಾ ಕಾರಾಗೃಹಕ್ಕೆ ಹಠಾತ್ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಎ-ಬ್ಲಾಕ್ ನಲ್ಲಿದ್ದ ಕೈದಿಗಳ ಪೈಕಿ ನ್ಯಾಯಾಂಗ ಬಂಧನದಲ್ಲಿರುವ ಕೈದಿಗಳಾದ ರಿಫತ್ ಅಲಿ, ಇಬ್ರಾಹೀಂ ಖಲೀಲ್, ಅಶ್ವಾಕ್ ಅಲಿಯಾಸ್ ಜುಟ್ಟು ಅಶ್ನಾಕ್, ಅರ್ಷದ್, ದಾವೂದ್ ಫರ್ವೇಝ್, ನಝರತ್ ಅಲಿ, ಶಿಫಾನ್, ಅಬ್ದುಲ್ ಸಾದಿಕ್ ಮತ್ತು ಅರ್ಫಾಝ್ ಎಂಬವರು ಅಕ್ರಮವಾಗಿ 10 ಮೊಬೈಲ್ ಗಳನ್ನು ಬಚ್ಚಿಟ್ಟಕೊಂಡಿರುವುದು ಪತ್ತೆಯಾಗಿದೆ. ಆ ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಈ ಕೈದಿಗಳ ಪೈಕಿ ರಿಫತ್ ಅಲಿ, ಇಬ್ರಾಹೀಂ ಖಲೀಲ್, ಅಶ್ವಾಕ್ ಅಲಿಯಾಸ್ ಜುಟ್ಟು ಅಶ್ವಾಕ್, ಅರ್ಷದ್ ಇತ್ತೀಚೆಗೆ ತೊಕ್ಕೊಟ್ಟು ಬಳಿ ನಡೆದ ಆರಿಫ್ ಕೊಲೆ ಪ್ರಕರಣದ ಆರೋಪಿಗಳಾಗಿದ್ದಾರೆ. ದಾವೂದ್ ಫರ್ವೇಝ್, ನಝರತ್ ಅಲಿ, ಶಿಫಾನ್, ಅಬ್ದುಲ್ ಸಾದಿಕ್ ಡ್ರಗ್ಸ್ ಪೆಡ್ಡರ್ ಆರೋಪಿಗಳಾಗಿದ್ದರೆ, ಅರ್ಫಾಝ್ ಕೋಕಾ ಪ್ರಕರಣದ ಆರೋಪಿಯಾಗಿದ್ದಾನೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.
ಈ ಸಂಬಂಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 82/2026, ಕಲಂ 323 ಬಿಎನ್ನೆಸ್ ಹಾಗೂ ಕಲಂ 42 ಕರ್ನಾಟಕ ಕಾರಾಗೃಹ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ.
ಜೈಲಿನಿಂದ ವಶಪಡಿಸಿಕೊಂಡಿರುವ ಮೊಬೈಲ್ ಫೋನ್ ಗಳ ಬಳಕೆ ಮತ್ತು ಅವುಗಳ ಪೂರೈಕೆಗೆ ಸಂಬಂಧಿಸಿ ಬರ್ಕೆ ಪೊಲೀಸ್ ಠಾಣೆಯಲ್ಲಿ ತನಿಖೆ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದ ಇತರ ಮಾಹಿತಿಗಳನ್ನು ಸಹ ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.










