Home ಶಾಲಾ ಕಾಲೇಜು ಎಸ್‌ಡಿಎಂ ಆರೋಹಮ್‌ 2026 ಉದ್ಘಾಟನೆ; ಕೌಶಲಾಧಾರಿತ ಶಿಕ್ಷಣ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ: ಶ್ರದ್ಧಾ ಅಮಿತ್‌

ಎಸ್‌ಡಿಎಂ ಆರೋಹಮ್‌ 2026 ಉದ್ಘಾಟನೆ; ಕೌಶಲಾಧಾರಿತ ಶಿಕ್ಷಣ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ: ಶ್ರದ್ಧಾ ಅಮಿತ್‌

0

ಉಜಿರೆ, ಸೆ. 10: ವಿದ್ಯಾರ್ಥಿ ಜೀವನದಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳ ಅನುಭವವೂ ಸಮಾನವಾದ ಅಗತ್ಯವಾಗಿದೆ. ಹಾಗಾಗಿ ಕೌಶಲಾಧಾರಿತ ಶಿಕ್ಷಣ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುವುದರ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಎಸ್‌ಡಿಎಂ ಆರೋಹಮ್‌-2026 ವಿದ್ಯಾರ್ಥಿಗಳಲ್ಲಿರುವ ಸೃಜನಶೀಲತೆ ಹಾಗೂ ಹೊಸತನದ ಚಿಂತನೆಯನ್ನು ಹೊರತರುವ ಪರಿಣಾಮಕಾರಿ ವೇದಿಕೆಯಾಗಿದೆ ಎಂದು ಬೆಂಗಳೂರಿನ ಕ್ಷೇಮವನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರದ್ಧಾ ಅಮಿತ್ ಹೇಳಿದರು.

ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ‘ಎಸ್‌ಡಿಎಂ ಆರೋಹಮ್ 2026’ ಎರಡು ದಿನಗಳ ರಾಷ್ಟ್ರೀಯ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಹಬ್ಬವನ್ನು ಡೋಲು ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಈ ರೀತಿಯ ಶೈಕ್ಷಣಿಕ ಹಬ್ಬಗಳು ವಿದ್ಯಾರ್ಥಿಗಳ ಸೃಜನಶೀಲ ಚಿಂತನೆಗೆ ವೇದಿಕೆಯಾಗುತ್ತದೆ. ವಿದ್ಯಾರ್ಥಿಗಳು ತಮ್ಮ ತಮ್ಮ ಆಸಕ್ತ ಕ್ಷೇತ್ರಗಳಲ್ಲಿ ಕ್ರಿಯಾತ್ಮಕತೆಯನ್ನು ಮೈಗೂಡಿಸಿಕೊಳ್ಳಬೇಕು. ಶೈಕ್ಷಣಿಕ ಜೀವನದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಜತೆಗೆ ಕಲೆ, ಸಾಹಿತ್ಯ ಹಾಗೂ ನಮ್ಮ ಸಂಸ್ಕೃತಿಯ ಅರಿವು ಕೂಡ ಬಹಳ ಮುಖ್ಯ. ಈ ಉದ್ದೇಶವನ್ನು “ಎಸ್‌ಡಿಎಂ ಆರೋಹಮ್ 2026” ಯಶಸ್ವಿಯಾಗಿ ಸಾಕಾರಗೊಳಿಸಲಿ ಎಂದು ಶುಭ ಹಾರೈಸಿದರು.

ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ವಿಶಿಷ್ಟ ಪ್ರತಿಭೆ ಅಡಗಿರುತ್ತದೆ. ಆ ಪ್ರತಿಭೆಯನ್ನು ಗುರುತಿಸಿ, ಅದಕ್ಕೆ ಸೂಕ್ತ ವೇದಿಕೆ ಕಲ್ಪಿಸುವಲ್ಲಿ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ತಮ್ಮ ಸ್ವ-ಸಾಮರ್ಥ್ಯದ ಮೇಲೆ ವಿಶ್ವಾಸವಿಟ್ಟು, ಅದನ್ನು ಸಕಾರಾತ್ಮಕವಾಗಿ ಬಳಸಿಕೊಂಡು ಜೀವನದಲ್ಲಿ ಯಶಸ್ಸಿನ ಗುರಿ ತಲುಪಬೇಕು.ತರಗತಿಯ ನಾಲ್ಕು ಗೋಡೆಗಳ ಹೊರಗೆ ನಡೆಯುವ ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವ ನೀಡುವುದರ ಜೊತೆಗೆ, ನೈಜ ಜೀವನದ ಸವಾಲುಗಳನ್ನು ಎದುರಿಸಲು ಅಗತ್ಯವಾದ ಆತ್ಮವಿಶ್ವಾಸ ಮತ್ತು ಕೌಶಲಗಳನ್ನು ಬೆಳೆಸುತ್ತವೆ. ಆದ್ದರಿಂದ ವಿದ್ಯಾರ್ಥಿಗಳು ಎರಡು ದಿನಗಳ ಈ ಹಬ್ಬದಲ್ಲಿ ಸಕ್ರಿಯವಾಗಿ ಭಾಗವಹಿಸಿ, ತಮ್ಮ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಪ್ರದರ್ಶಿಸುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶಚಂದ್ರ ಎಸ್ ಹೇಳಿದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ, ಉಪಪ್ರಾಂಶುಪಾಲೆ ನಂದಕುಮಾರಿ ಕೆ ಪಿ ಹಾಗೂ ಪರೀಕ್ಷಾಂಗ ಕುಲಸಚಿವ ಬಿ ಗಣೇಶ್ ನಾಯಕ್, ಡೀನ್ ಗಳು, ವಿಭಾಗ ಮುಖ್ಯಸ್ಥರು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈವರೆಗೆ ಎಸ್‌ಡಿಎಂ ಆರೋಹಮ್‌ 2026 ಭಾಗವಾಗಿ ಎರಡು ದಿನಗಳ ಕಾಲ ನಡೆಯವ ವಿವಿಧ ಸ್ಪರ್ಧೆಗಳಲ್ಲಿ ರಾಜ್ಯಾದಾದ್ಯಂತ 20 ಪಿಯುಸಿ ಕಾಲೇಜುಗಳು ಮತ್ತು 17 ಪದವಿ ಕಾಲೇಜುಗಳು ನೊಂದಾಯಿಸಿಕೊಂಡಿವೆ.

ವಿದ್ಯಾರ್ಥಿನಿ ವೈದೇಹಿ ಮತ್ತು ತಂಡದವರು ಪ್ರಾರ್ಥಿಸಿದರು. ಕನ್ನಡ ಪ್ರಾಧ್ಯಾಪಕ ಡಾ. ದಿವಾಕರ್ ಸ್ವಾಗತಿಸಿ, ವಂದಿಸಿ ಹಾಗೂ ಕಾರ್ಯಕ್ರಮ ನಿರೂಪಿಸಿದರು.

NO COMMENTS

LEAVE A REPLY

Please enter your comment!
Please enter your name here

Exit mobile version