Home ಅಪರಾಧ ಲೋಕ ಬಿಸಿರೋಡ್ ಲಾವಣ್ಯ ಕೊಲೆ ಪ್ರಕರಣ‌; ಆರೋಪಿ ಚೇತನ್ ಪೊಲೀಸ್ ವಶಕ್ಕೆ

ಬಿಸಿರೋಡ್ ಲಾವಣ್ಯ ಕೊಲೆ ಪ್ರಕರಣ‌; ಆರೋಪಿ ಚೇತನ್ ಪೊಲೀಸ್ ವಶಕ್ಕೆ

1
0

ಬಂಟ್ವಾಳ : ಬಿ.ಸಿ.ರೋಡು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜು.16ರಂದು ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚೇತನ್ ಆರೋಗ್ಯ ಸ್ಥಿರವಾಗಿರುವ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಪೊಲೀಸರು 11 ದಿನಗಳ ಬಳಿಕ ಸೋಮವಾರ ವಶಕ್ಕೆ ತೆಗೆದುಕೊಂಡಿದ್ದಾರೆ.

ಕಕ್ಯಪದವು ನಿವಾಸಿ ಲಾವಣ್ಯ ಎಂಬ ಯುವತಿಯನ್ನು ಬೆಳ್ತಂಗಡಿ ಓಡಿಲ್ನಾಳ ನಿವಾಸಿ ಚೇತನ್ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆಗೈದಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಘಟನೆ ನಡೆದ ಬಳಿಕ ಆತ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದ್ದನು. ಘಟನೆಯ ಮರುದಿನ ಮಂಗಳೂರಿನಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ ಆತ ವಿಷಕಾರಿ ಪದಾರ್ಥ (ಇಲಿಪಾಷಾಣ) ಸೇವಿಸಿದ್ದಾನೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಹಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ವೆನ್ಹಾಕ್ ಆಸ್ಪತ್ರೆಯಲ್ಲಿ ಆರಂಭದಲ್ಲಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗಿದ್ದು, ಆರೋಗ್ಯದಲ್ಲಿ ಸುಧಾರಣೆ ಕಂಡುಬಂದ ಬಳಿಕ ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಲಾಗಿತ್ತು.

ಪ್ರಸ್ತುತ ಆರೋಪಿ ಬಂಟ್ವಾಳ ನಗರ ಪೊಲೀಸರ ವಶದಲ್ಲಿದ್ದು ಮಂಗಳವಾರ ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ಬಂಟ್ವಾಳ ಎ.ಎಸ್.ಪಿ.(ಐಪಿಎಸ್) ಯಶ್ ಕುಮಾರ್ ಶರ್ಮ ಅವರ ನಿರ್ದೇಶನದಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಅವರ ನೇತೃತ್ವದಲ್ಲಿ ಕೊಲೆ ಪ್ರಕರಣದ ತನಿಖೆ ನಡೆಯುತ್ತಿದೆ.

LEAVE A REPLY

Please enter your comment!
Please enter your name here