
ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ಕೇರಳದ ಕೊಚ್ಚಿಯಲ್ಲಿ ಆ.5 ರಂದು ರಾಷ್ಟ್ರೀಯ ತನಿಖಾ ದಳ (NIA) ಮಹತ್ವದ ಕಾರ್ಯಾಚರಣೆ ನಡೆಸಿ
ಬಂಧಿಸಿದ್ದಾರೆ.
ಬಂಧಿತನನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಉಮ್ಮರ್ ಫಾರೂಕ್ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ A13 ಆರೋಪಿಯಾಗಿರುವ ಉಮ್ಮರ್ ಫಾರೂಕ್, ಕೃತ್ಯ ಎಸಗಿದ ಪ್ರಮುಖ ಆರೋಪಿಗಳಿಗೆ ತಲೆಮರೆಸಿಕೊಳ್ಳಲು ಸಹಕಾರ ನೀಡಿದ್ದಾನೆ ಎಂದು ಎನ್ಐಎ ಆರೋಪಿಸಿದೆ. ಖಚಿತ ಮಾಹಿತಿಯ ಮೇರೆಗೆ ಕೊಚ್ಚಿಯಲ್ಲಿ ದಾಳಿ ನಡೆಸಿದ ಎನ್ಐಎ ಅಧಿಕಾರಿಗಳು ಉಮ್ಮರ್ ಫಾರೂಕ್ನನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ. ಉಮ್ಮರ್ ಫಾರೂಕ್ ಎನ್ಐಎ ವಾಂಟೆಡ್ ಪಟ್ಟಿಯಲ್ಲಿದ್ದ ಆರೋಪಿಯಾಗಿದ್ದು, ಆತನ ಬಗ್ಗೆ ಮಾಹಿತಿ ನೀಡಿದವರಿಗೆ 2 ಲಕ್ಷ ಬಹುಮಾನವನ್ನು ಎನ್ಐಎ ಘೋಷಿಸಿತ್ತು.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು 2022ರ ಜುಲೈ 26ರಂದು ರಾತ್ರಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಎನ್ಐಎ ನಡೆಸುತ್ತಿದೆ.
ಇದೇ ಪ್ರಕರಣದಲ್ಲಿ ಈ ವರ್ಷದ ಜುಲೈ 11ರಂದು ಇಬ್ಬರು ಆರೋಪಿಗಳಾದ ನೌಷದ್ ಹಾಗೂ ನಾಸೀರ್ ಅವರನ್ನು ಎನ್ಐಎ ಬಂಧಿಸಿತ್ತು. ವಿಚಾರಣೆ ವೇಳೆ ನಾಸೀರ್ ನೀಡಿದ ಮಾಹಿತಿಯ ಆಧಾರದ ಮೇಲೆ ಉಮ್ಮರ್ ಫಾರೂಕ್ನ ಸುಳಿವು ದೊರೆತಿದ್ದು, ಅದರಂತೆ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.




