ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ (ಡಿಸಿಸಿ) ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷರ ಅನುಮೋದನೆಯ ಮೇರೆಗೆ ಕರ್ನಾಟಕದ ವಿವಿಧ ಜಿಲ್ಲೆಗಳ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ನೇಮಕಾತಿಯನ್ನು ಪ್ರಕಟಿಸಲಾಗಿದೆ. ಸೆ. 9, 2026ರಿಂದಲೇ ಈ ನೇಮಕಾತಿಗಳು ಜಾರಿಗೆ ಬಂದಿವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕರ್ನಾಟಕದ ವಿವಿಧ ಜಿಲ್ಲೆಗಳ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯ ಭಾಗವಾಗಿ, ಎಐಸಿಸಿ ವೀಕ್ಷಕರು ಆಯಾ ಜಿಲ್ಲೆಗಳಲ್ಲಿ ಪಕ್ಷದ ಪದಾಧಿಕಾರಿಗಳು ಹಾಗೂ ಪ್ರಮುಖ ಮುಖಂಡರೊಂದಿಗೆ ಸಮಗ್ರ ಸಮಾಲೋಚನೆ ನಡೆಸಿ ವರದಿ ಸಲ್ಲಿಸಿದ್ದರು. ಬಳಿಕ ವೀಕ್ಷಕರು ಹಾಗೂ ಹಿರಿಯ ನಾಯಕರೊಂದಿಗೆ ಪ್ರತ್ಯೇಕ ಚರ್ಚೆ ನಡೆಸಿ ಜಿಲ್ಲಾಧ್ಯಕ್ಷರ ನೇಮಕಾತಿಯನ್ನು ಅಂತಿಮಗೊಳಿಸಲಾಗಿದೆ ಎಂದು ಎಐಸಿಸಿ ತಿಳಿಸಿದೆ.









